ಡೆಂಗ್ಯೂ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳ ನೇಮಕ
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹರಡದಂತೆ ಹಾಗೂ ಸೊಳ್ಳೆಗಳು ಹೆಚ್ಚಾಗದಂತೆ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿಗೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಚಳ್ಳಕೆರೆ ತಾಲ್ಲೂಕಿಗೆ ತಾಂತ್ರಿಕ ಸಹಾಯಕರು ಮತ್ತು ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ, ಹಿರಿಯೂರು ತಾಲ್ಲೂಕಿಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ತಿಮ್ಮಪ್ಪ, ಹೊಳಲ್ಕೆರೆ ತಾಲ್ಲೂಕಿಗೆ ಗ್ರಾ.ಕು.ನೀ ಮತ್ತು ನೈ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ, ಹೊಸದುರ್ಗ ತಾಲ್ಲೂಕಿಗೆ ಪಂ.ರಾಜ್ ಇಂಜಿನಿಯರ್ ವಿಭಾಗ ಕಾರ್ಯಪಾಲಕ ಅಭಿಯಂತರ ಹನುಮಂತಪ್ಪ ಹಾಗೂ ಮೊಳಕಾಲ್ಮೂರು ತಾಲ್ಲೂಕಿಗೆ ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಬಿ.ಬೀರಲದಿನ್ನಿ ಅವರನ್ನು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಇದರ ಜೊತೆಗೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ಕಾರ್ಯ ವೈಖರಿ ಪರಿಶೀಲನೆ ಹಾಗೂ ವರದಿಗಳನ್ನು ಕ್ರೋಢಿಕರಣ ಮಾಡಿ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಿಸಿಲಾಗಿದೆ.
ತಾಲ್ಲೂಕು ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಚತೆ ಹಾಗೂ ಡೆಂಗ್ಯೂ ಜ್ವರದ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಪರಿಶೀಲಿಸಿ ಕೈಗೊಂಡ ಕ್ರಮಗಳ ಕುರಿತು ಕೂಲಂಕಷವಾಗಿ ಪರಿಶೀಲಿಸಿ ವರದಿಯನ್ನು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳಿಗೆ ಸಲ್ಲಿಸಿ ಅದರ ಪ್ರತಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸಲು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದ್ದಾರೆ.