ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಜಿಲ್ಲೆಯಲ್ಲಿ ಸಲ್ಲಿಕೆಯಾಗಿರುವ 41580 ಅರ್ಜಿಗಳನ್ನು ಒಂದು ವರ್ಷದೊಳಗೆ ವಿಲೇವಾರಿ ಮಾಡಿ, ಅರ್ಹ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದÀರು.
ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಸಾಗುವಳಿ ಚೀಟಿ ನೀಡುವಂತೆ ಚಿತ್ರದುರ್ಗದಲ್ಲಿ ಸುಮಾರು 41,580 ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳನ್ನು ಮುಂದಿನ ಒಂದು ವರ್ಷದಲ್ಲಿ ವಿಲೇವಾರಿಗೊಳಿಸಬೇಕು. ಅರ್ಜಿ ಸಲ್ಲಿಸಿದವರಲ್ಲಿ, ಸಾಗುವಳಿಯೇ ಮಾಡಿದವರು ಕೂಡ ಇರುವ ಸಾಧ್ಯತೆಗಳಿದ್ದು, ಪರಿಶೀಲನೆ ನಡೆಸಬೇಕು, ಸಮಗ್ರವಾಗಿ ಪರಿಶೀಲಿಸಿ, ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು. ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳು ವಿಲೇವಾರಿಯಾಗದ ಕಾರಣ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಜನರನ್ನು ಹೀಗೆ ಅಲೆಸುವುದು ಸರಿಯಲ್ಲ. ಜನ ಭರವಸೆ ಇಟ್ಟು ಬದಲಾವಣೆ ನಿರೀಕ್ಷೆಯಿಂದ ಹೊಸ ಸರ್ಕಾರ ತಂದಿದ್ದಾರೆ. ಸುಧಾರಣೆ ಕಾರ್ಯರೂಪಕ್ಕೆ ಬರದಿದ್ದರೆ ಪ್ರಜಾಪ್ರಭುತ್ವದ ಆಶಯವೇ ವ್ಯರ್ಥ. ಹೀಗಾಗಿ ಸರ್ಕಾರವೂ ಬಡ ಜನರ ಪರ ಕೆಲಸ ಮಾಡಲು ಬದ್ಧವಾಗಿದೆ. ಆದರೆ, ಸರ್ಕಾರದ ದ್ಯೇಯೋದ್ದೇಶ ಈಡೇರಲು ಅಧಿಕಾರಿಗಳ ಸಹಕಾರ ಮುಖ್ಯ. ಹೀಗಾಗಿ ಮುಂದಿನ ಒಂದು ವರ್ಷದಲ್ಲಿ ಬಗರ್ ಹುಕುಂ ಅರ್ಜಿಗಳನ್ನು ವಿಲೇಗೊಳಿಸಿ. ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು. ಅಧಿಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ “ಬಗರ್ ಹುಕುಂ ಆ್ಯಪ್” ಅಭಿವೃದ್ಧಿಪಡಿಸುತ್ತಿದ್ದು ಇದರ ಸಹಾಯದಿಂದ ಸ್ಯಾಟಲೈಟ್ ಇಮೇಜ್ ಪಡೆದು ನೈಜ ಸಾಗುವಳಿದಾರರನ್ನು ಗುರುತಿಸಬಹುದು. ಅಲ್ಲದೆ, ಇ-ಸಾಗುವಳಿ ಚೀಟಿಯನ್ನೂ ನೀಡಬಹುದು” ಎಂದರು.
ಸರ್ಕಾರಿ ಆಸ್ತಿಗಳ ರಕ್ಷಣೆಗೆ ಕ್ರಮ: ರಾಜ್ಯದಲ್ಲಿನ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಕ್ರಮವಹಿಸಲಾಗಿದ್ದು, ಸರ್ಕಾರಿ ಆಸ್ತಿ ದಾಖಲೆನಗಳನ್ನು ನಮೂದಿಸಲು ಆಪ್ ಅಭಿವೃದ್ಧಿ ಪಡಿಸಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಮೂಲ ನೋಂದಣಿ ಸಂಖ್ಯೆ ಆಧರಿಸಿ, ಸರ್ಕಾರಿ ಆಸ್ತಿಗಳ ನೊಂದಣಿ ಆಸ್ತಿ ಮಾಡಲಾಗುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ 2023ರ ಸೆಪ್ಟೆಂಬರ್ ಆರಂಭದಲ್ಲಿ 4447 ಸರ್ಕಾರಿ ಆಸ್ತಿಗಳ ಪ್ಲಾಗಿಂಗ್ ಮಾಡಲಾಗಿದೆ. ಸೆಪ್ಟೆಂಬರ್ನಿಂದ ಅಕ್ಟೋಬರ್ ಆರಂಭದವರೆಗೆ ಜಿಲ್ಲೆಯಲ್ಲಿ 3326 ಸರ್ಕಾರಿ ಆಸ್ತಿಗಳ ಪ್ಲಾಗಿಂಗ್ ಮಾಡಲಾಗಿದೆ. ಈ ಆಸ್ತಿಗಳನ್ನು ಒತ್ತುವರಿಯಾಗದಂತೆ ತಡೆಯಲು ಮೂರು ತಿಂಗಳಿಗೊಮ್ಮೆ ಆಸ್ತಿಗಳ ಜಾಗಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಖುದ್ದು ಭೇಟಿ ನೀಡಿ, ಒತ್ತುವರಿಯಾಗದಿರುವುದನ್ನು ದೃಢೀಕರಿಸಿಕೊಂಡು ಜಿಪಿಎಸ್ ಮೂಲಕ ಪ್ರಾಮಾಣಿಕರಿಸಬೇಕು ಎಂದು ತಿಳಿಸಿದರು.