ಶಿಕ್ಷಣವೇ ಶಕ್ತಿ ಎಂಬ ನಾಣ್ನೂಡಿಗೆ ಶಕ್ತಿ ತುಂಬಿದವರು ನಾಲ್ವಡಿ ಕೃಷ್ಣರಾಜ ಒಡೆಯರು ಎಂದು ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ವಿಶ್ಲೇಷಿಸಿದರು.
ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯಲ್ಲಿ ಸಾನಿಧ್ಯವಹಿಸಿ ಮಾತನಾಡಿದ ಶ್ರೀಗಳು ಅಸ್ಷೃಶ್ಯರ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ ಅವರು, ಶಿಕ್ಷಣವೇ ಎಲ್ಲರ ಅಭಿವೃದ್ಧಿಗೂ ಮೂಲ ಎಂದು ಭಾವಿಸಿ, ಶಿಕ್ಷಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದರು. ಮೈಸೂರು ವಿಶ್ವವಿದ್ಯಾನಿಲಯ ಪ್ರಾರಂಭಿಸಿದರು. ಬೆಂಗಳೂರಿನಲ್ಲಿ ಕೃಷಿ ವಿ.ವಿ ಸ್ಥಾಪಿಸಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭಕ್ಕೆ ಕಾರಣೀಭೂತರಾದರು. ಕಡ್ಡಾಯ ಪ್ರಾಥಮಿಕ ಶಿಕ್ಷಣ ಕಾಯಿದೆ ಜಾರಿ, ವಯಸ್ಕರಿಗಾಗಿ ವಯಸ್ಕರ ಶಾಲೆ ತೆರೆದರು.
ಪ್ರಜೆಗಳ ಸಮಸ್ಯೆ ಆಲಿಸಲು ಪ್ರಜಾಪ್ರತಿನಿಧಿ ಸಭೆ ಬಲಗೊಳಿಸಿ, ನ್ಯಾಯ ವಿಧಾಯಕ ಸಭೆ ಸ್ಥಾಪಿಸಿದರು. ಸಾಮಾಜಿಕ ನ್ಯಾಯದ ಪರ ಮಹಾರಾಜರ ನಿಲುವು ಯಾವಾಗಲು ಹೆಚ್ಚಾಗಿತ್ತು. ಮೈಸೂರಿನಲ್ಲಿ ನಡೆದ ಮೀಸಲಾತಿ ಚಳುವಳಿ, ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತದ್ದು. ಮಿಲ್ಲರ್ ಆಯೋಗದ ಶಿಫಾರಸ್ಸಿನಂತೆ, ಬ್ರಾಹ್ಮಣೇತರರಿಗೆ ಶೇ 75% ಮೀಸಲಾತಿ,ನೀಡಿ ಹೊಸ ಶಕೆಗೆ ಮುನ್ನುಡಿಯನ್ನಿಟ್ಟವರು ನಾಲ್ವಡಿಯವರು.
ತಮ್ಮ ಕಾಲಾವಧಿಯಲ್ಲಿ ದೇವದಾಸಿ ಪದ್ದತಿ ನಿರ್ಮೂಲನೆಗೊಳಿಸಿದ್ದು, ಗೆಜ್ಜೆಪೂಜೆ ಕಾರ್ಯಕ್ರಮ ನಿಷೇಧಿಸಿದ್ದು, ವಿಧವಾ ಶಿಕ್ಷಣಕ್ಕೆ ಪ್ರೋತ್ಸಾಹಿಸಿ, ಮಹಿಳೆಯರಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ನೀಡಲು ಕಾನೂನು ರೂಪಿಸಿದ್ದು. ಹೀಗೆ ಮಹಾರಾಜರು ಸಾಮಾಜಿಕ ಕಳಕಳಿಯಿಂದ ಕೈಗೊಂಡ ಕ್ರಮಗಳು ಅನೇಕ.
ಒಂದರ ಹಿಂದೆ ಒಂದರಂತೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸೇವೆ ಅಪರಿಮಿತ ಎಂದು ವಿಶ್ಲೇಷಿಸಿದರು.
ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮೀಜಿ ಮಾತನಾಡಿ ಆಡು ಮುಟ್ಟದ ಸೊಪ್ಪಿಲ್ಲ್ಲ ಅನ್ನೋ ಮಾತು ಎಷ್ಟು ನಿಜವೋ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ನೀಡದ ಕ್ಷೇತ್ರವೇ ಇಲ್ಲ ಅನ್ನೋದು ಅಷ್ಟೇ ಸತ್ಯವೆಂದರು.
ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ ಎಂದರು.
ಯಾದವ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಮಾತನಾಡಿ ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ ಎಂದು ಹೇಳಿದರು.ಸಭೆಯಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಈಡಿಗ ಗುರುಪೀಠದ ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಮೇದಾರ ಗುರುಪೀಠದ ಶ್ರೀ ಇಮ್ಮಡಿ ಬಸವಪ್ರಭು ಕೇತೇಶ್ವರ ಸ್ವಾಮೀಜಿ, ಕುಂಬಾರ ಗುರುಪೀಠದ ಜಗದ್ಗುರು ಶ್ರೀ ಬಸವ ಗುಂಡಯ್ಯ ಸ್ವಾಮೀಜಿ, ಶಿವಮೊಗ್ಗದ ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ಚನ್ನಬಸವ ಸ್ವಾಮೀಜಿ, ಹಾವೇರಿ ಬಸವ ಶಾಂತಲಿಂಗ ಸ್ವಾಮೀಜಿ, ಸಿರಗುಪ್ಪ ಬಸವ ಭೂಷಣ ಸ್ವಾಮೀಜಿ, ಕೊರಟಗೆರೆ ಮಹಾಲಿಂಗ ಸ್ವಾಮೀಜಿ, ನೆಲಮಂಗಲ ಡಾ.ರಮಾನಂದ ಸ್ವಾಮೀಜಿ, ತುಮಕೂರಿನ ತಿಪ್ಪೇರುದ್ರ ಸ್ವಾಮೀಜಿ, ಬೆಳಗಾವಿ ಜಯದೇವ ಸ್ವಾಮೀಜಿ ಗೌರವ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಡಿವಾಳ ಜಗದ್ಗುರುಗಳ 40ನೇ ಜನ್ಮದಿನೋತ್ಸವದ ಶುಭಾಶಯಗಳನ್ನು ಶ್ರೀಗಳ ತಂಡ ತಿಳಿಸಿದರು.